
ಚೆನ್ನೈ: ರವಿಚಂದ್ರನ್ ಅಶ್ವಿನ್ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಬಾಂಗ್ಲಾದೇಶ ಎದುರು ಚೆನ್ನೈ ಟೆಸ್ಟ್ ಪಂದ್ಯದಲ್ಲಿ 280 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಮೊದಲ ಇನಿಂಗ್ಸ್ನಲ್ಲಿ ಆಕರ್ಷಕ ಶತಕ ಹಾಗೂ ಎರಡನೇ ಇನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸಿದ ರವಿಚಂದ್ರನ್ ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. 515 ರನ್ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು 234 ರನ್ಗಳಿಗೆ ಸರ್ವಪತನ ಕಂಡಿದೆ


ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ಗೆಲ್ಲಲು 515 ರನ್ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು ಮೂರನೇ ದಿನದಾಟದಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತ್ತು, ಆದರೆ ನಾಲ್ಕನೇ ದಿನದಾಟದ ಮೊದಲಾರ್ಧದಲ್ಲಿಯೇ ಬಾಂಗ್ಲಾದೇಶದ ಉಳಿದ ಆರು ಬ್ಯಾಟರ್ಗಳನ್ನು ಪೆವಿಲಿಯನ್ನಿಗಟ್ಟುವಲ್ಲಿ ಭಾರತದ ಸ್ಪಿನ್ನರ್ಗಳಾದ ಅಶ್ವಿನ್ ಹಾಗೂ ಜಡೇಜಾ ಯಶಸ್ವಿಯಾದರು. ಬಾಂಗ್ಲಾದೇಶ ಪರ ಶಕೀಬ್ ಅಲ್ ಹಸನ್ ಹಾಗೂ ನಾಯಕ ನಜ್ಮುಲ್ ಹೊಸೈನ್ ಶಾಂತೋ ಕೊಂಚ ಪ್ರತಿರೋಧ ತೋರಿದರು. ಈ ಜೋಡಿಯನ್ನು ಅಶ್ವಿನ್ ಬೇರ್ಪಡಿಸುವಲ್ಲಿ ಯಶಸ್ವಿಯಾದರು. ಶಕೀಬ್ 56 ಎಸೆತಗಳನ್ನು ಎದುರಿಸಿ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ನಜ್ಮುಲ್ ಹೊಸೈನ್ ಶಾಂತೋ 127 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 82 ರನ್ ಗಳಿಸಿ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಈ ವಿಕೆಟ್ ಪತನವಾಗುತ್ತಿದ್ದಂತೆಯೇ ಟೀಂ ಇಂಡಿಯಾ ಗೆಲುವು ಖಚಿತವಾಯಿತು.
ಅಶ್ವಿನ್ಗೆ 6 ವಿಕೆಟ್: ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಅಶ್ವಿನ್ಗೆ ಯಾವುದೇ ವಿಕೆಟ್ ದಕ್ಕಿರಲಿಲ್ಲ. ಆದರೆ ಇದೀಗ ಎರಡನೇ ಇನಿಂಗ್ಸ್ನಲ್ಲಿ ಬಾಂಗ್ಲಾದೇಶದ 6 ವಿಕೆಟ್ ಕಬಳಿಸುವ ಮೂಲಕ ಪಂದ್ಯ ನಾಲ್ಕೇ ದಿನಕ್ಕೆ ಮುಗಿಯುವಲ್ಲಿ ಪ್ರಮುಖ ಪಾತ್ರವಹಿಸಿದರು. ಇನ್ನು ಅಶ್ವಿನ್ ಎರಡನೇ ಇನಿಂಗ್ಸ್ನಲ್ಲಿ 7ನೇ ಬಾರಿಗೆ 5+ ವಿಕೆಟ್ ಕಬಳಿಸುವ ಮೂಲಕ ಕ್ರಿಕೆಟ್ ದಿಗ್ಗಜರಾದ ಮುತ್ತಯ್ಯ ಮುರುಳೀಧರನ್ ಹಾಗೂ ಶೇನ್ ವಾರ್ನ್ ದಾಖಲೆ ಸರಿಗಟ್ಟುವಲ್ಲಿ ಯಶಸ್ವಿಯಾದರು.

