
ಸಿಎಂ ಸಿದ್ದರಾಮಯ್ಯ & ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಡುವೆ ಪದೇ, ಪದೇ ರಾಜಕೀಯ ತಿಕ್ಕಾಟ ನಡೆಯುತ್ತಿದೆ. ಅದರಲ್ಲೂ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಇಬ್ಬರೂ ಫೈಟಿಂಗ್ ಜೋರು ಮಾಡಿದ್ದಾರೆ. ಈ ಸಮಯದಲ್ಲೇ ಎಚ್ಡಿಕೆ ಇದೀಗ ಸುದೀರ್ಘವಾಗಿರುವ ಟ್ವೀಟ್ ಒಂದನ್ನ ಮಾಡಿ, ಸಿಎಂ ಸಿದ್ದರಾಮಯ್ಯ ಅವರಿಗೆ ಹೊಸ ಸವಾಲು ಎಸೆದಿದ್ದಾರೆ.



‘ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು’
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ ಅವರು, ‘ಶ್ರೀ @siddaramaiah ನವರೇ.. ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ.’
‘”ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ” ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ.’


‘ಮನುಷ್ಯರು ಹೇಳುವ ಮಾತೇ ಇದು?’
‘ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ.’

‘ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವುಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ.’

ಸಿಎಂಗೆ ಎಚ್ಡಿಕೆ ಸವಾಲು!
‘ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ? ದೇವರಾಜೆಗೌಡ, Broker ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆ ನಿಮ್ಮ ಸರಕಾರದ ಮಾನವನ್ನು ಹಾಸನದಲ್ಲಿ ಪೆನ್ ಡ್ರೈವ್ ರೂಪದಲ್ಲಿ ವೋಟಿಗೆ ಹರಾಜಾಗಲಿಲ್ಲವೇ? ಚಾಲಕ ಕಾರ್ತಿಕ್ ಗೌಡ ಆ ನೊಂದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಿದ್ದ ಮೊದಲ ಪೆನ್ ಡ್ರೈವನ್ನು ನಿಮಗೆ ತಂದು ಕೊಡಲಿಲ್ಲವೇ? ಎಂದು ನಿಮ್ಮ ಉಪ ಮುಖ್ಯಮಂತ್ರಿಯನ್ನು ಒಮ್ಮೆಯಾದರೂ ಕೇಳಿದ್ದೀರಾ ಮುಖ್ಯಮಂತ್ರಿಗಳೇ..?’
‘ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ ‘ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ?’
‘ಯಾರ ಕಚೇರಿಯಲ್ಲಿ ಇರುತ್ತಾರೆ?’
‘ಪಕ್ಷದ ಅಧ್ಯಕ್ಷನಾಗಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಆತನ ಮೇಲಿರುವ ಆರೋಪ ಸಾಬೀತಾದರೆ ಪಕ್ಷದಲ್ಲಿ ಆತನಿಗೆ ಸ್ಥಾನವಿಲ್ಲ. ನಿಮಗೆ ಸಂಶಯ ಸಲ್ಲ. ಇನ್ನು, SIT ತನಿಖೆ ಅಂತೀರಾ? SIT ಹೆಸರಿನಲ್ಲಿ ಎಷ್ಟು ಸ್ಲೀಪರ್ ಸೆಲ್ ಗಳು ತನಿಖೆ ಮಾಡುತ್ತಿವೆ ಎಂದು ಬಿಚ್ಚಿಟ್ಟರೆ ನಿಮ್ಮ ಸರಕಾರ ಕಥೆ ಮುಗಿದೇ ಹೋಗುತ್ತದೆ. CD ಶಿವು ಆದೇಶದ ಮೇರೆಗೆ ಪೆನ್ ಡ್ರೈವ್ ಗಳನ್ನು ಹಂಚಿದ ಕಿರಾತಕರೆಲ್ಲ ದಿನ ಬೆಳಗಾದರೆ ಯಾರ ಮನೆಯಲ್ಲಿ ಪ್ರತ್ಯಕ್ಷರಾಗುತ್ತಾರೆ? ವಿಧಾನಸೌಧದಲ್ಲಿ ಯಾರ ಕಚೇರಿಯೊಳಕ್ಕೆ ನುಸಳುತ್ತಾರೆ ಎನ್ನುವುದು ಇಂಟೆಲಿಜೆನ್ಸ್ ಅನ್ನು ಇಟ್ಟುಕೊಂಡಿರುವ ನಿಮಗೇ ಗೊತ್ತಿಲ್ಲದಿದ್ದರೆ ಹೇಗೆ?’
‘ಕೊನೆಯದಾಗಿ; ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಅವರನ್ನು Tomorrow Land ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ.. ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ.’ ಎಂದು ಟ್ವೀಟ್ ಮಾಡಿದ್ದಾರೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ.