
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ.


ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನದ ಧಮ೯ದಶಿ೯ ಡಾ. ರವಿ.ಎನ್ ದೀಪ ಪ್ರಜ್ವಲಿಸಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದು ಮುಳಿಯ ಶ್ರೀ ವೈಷ್ಣವಿ ಕ್ಷೇತ್ರದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ದಿವ್ಯ ಉಪಸ್ಥಿತಿವಹಿಸಲಿದ್ದಾರೆ. ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಶ್ರೀಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಯಧುವೀರ್ ಒಡೆಯರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಕುಲಾಲ ಸಮುದಾಯದ ಪ್ರಮುಖ ವ್ಯಕ್ತಿಯಾಗಿ ಗುರುತಿಸಿ, ಕುಲಾಲ ಸಮಾಜಕ್ಕೆ ಸಂಬಂಧಿಸಿದ ಹಲವಾರು ದೈವ, ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಧಾರ್ಮಿಕ ಧುರೀಣ ಎಂದೇ ಹೆಸರುವಾಸಿಯಾದ ಶ್ರೀ ಪುರುಷೋತ್ತಮ ಕುಲಾಲ್ ಕಲ್ಬಾವಿ ಅವರಿಗೆ ಅತಿಥಿ ಗಣ್ಯರ ಸಮ್ಮುಖದಲ್ಲಿ “ಧಾರ್ಮಿಕ ಸಿಂಧೂರ“ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.


ಪುರುಷೋತ್ತಮ ಕುಲಾಲ್ ಕಲ್ಬಾವಿ ಅವರ ಕಿರು ಪರಿಚಯ

ಪುರುಷೋತ್ತಮ ಕುಲಾಲ್ ಕಲ್ಬಾವಿ ಅವರು ಕುಲಾಲ ಸಮುದಾಯದ ಒಬ್ಬ ಪ್ರಮುಖ ವ್ಯಕ್ತಿ, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಯಶಸ್ವಿಯಾಗಿ ಬ್ರಹ್ಮ ಕಲಶ ನೆರವೇರಿಸಿದರು. ಇವರು ಕುಲಾಲ ಸಮಾಜದ ಧಾರ್ಮಿಕ ಧುರೀಣ ಎಂದೇ ಹೆಸರುವಾಸಿ. ಇವರಿಗೆ ಈ ಬಾರಿಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಯ ಒಕ್ಕೂಟದ ಕುಂಭ ಕಲಾವಳಿ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮದಲ್ಲಿ “ಧಾರ್ಮಿಕ ಸಿಂಧೂರ” ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಿದೆ.

