
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ ನಾರಾಯಣ ಅವರ ಮನೆ ದರೋಡೆಗೆ ಯತ್ನಿಸಿರುವ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.



ಬಂಧಿತರನ್ನು ಪುತ್ತೂರಿನ ಮುಡೂರು ನಿವಾಸಿ ಕಾರ್ತಿಕ್ ರಾವ್ (31), ಪತ್ನಿ ಕೆ.ಎಸ್.ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಡಿ. 17 ರ ಮಧ್ಯರಾತ್ರಿ ಹೆಲ್ಮೆಟ್ ಧರಿಸಿದ್ದ ಇಬ್ಬರು ಅಪರಿಚಿತರು ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ.ನಾರಾಯಣ (84) ಎಂಬುವವರ ಮನೆಗೆ ಹಿಂಬಾಗಿಲಿನ ಮೂಲಕ ಪ್ರವೇಶ ಮಾಡಿದ್ದರು. ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಲು ಯತ್ನ ಮಾಡಿ ದಂಪತಿಯನ್ನು ಬೆದರಿಸಿದ್ದರು


. ಈ ಸಂದರ್ಭದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು,ಜೋರಾಗಿ ಕಿರುಚಿಕೊಂಡಾಗ ಆರೋಪಿಗಳು ಪರಾರಿಯಾಗಿದ್ದರು. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ಮಾಡಿದ ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


