
ಯಾದಗಿರಿ ಪಿಎಸ್ಐ ಪರಶುರಾಮ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಗುರುವಾರ ಪೊಲೀಸ್ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೆಸರಿನ ಲೆಟರ್ ಹೆಡ್ ಪತ್ತೆಯಾಗಿದೆ.


ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಕೇಳಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಪೋಸ್ಟಿಂಗ್ಗಾಗಿ ಲೆಟರ್ ಹೆಡ್ ನೀಡಿದ್ದರು. ಈ ಲೆಟರ್ ಹೆಡ್ ಸಿಐಡಿ ಅಧಿಕಾರಿಗಳು ಮಹಜರು ವೇಳೆ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.
ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಪೋಸ್ಟಿಂಗ್ಗಾಗಿ ಶಾಸಕ ಚೆನ್ನಾರೆಡ್ಡಿ 15 ಲಕ್ಷ ರೂ. ಕೇಳಿದ್ದರು ಎನ್ನಲಾಗಿದೆ. ಹೀಗಾಗಿ ಪಿಎಸ್ಐ ಪರಶುರಾಮ ಹಣ ಹೊಂದಿಸುತ್ತಿದ್ದರು. ಇದೀಗ 7.33 ಲಕ್ಷ ನಗದು ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಜೊತೆಗೆ ಇಲಾಖಾ ರಿವಾಲ್ವರ್ ಸಿಮ್ಕಾರ್ಡ್, ಮೊಬೈಲ್ ಮತ್ತು ವಾಕಿಟಾಕಿ ಜಪ್ತಿ ಮಾಡಿದ್ದಾರೆ. ಪರಶುರಾಮ ಮೃತಪಟ್ಟ ಜಾಗದಲ್ಲಿ ಮುಗಿನಿಂದ ಬಾಯಿಂದ ಬಂದ ರಕ್ತದ ಮಾದರಿ ಸಹ ಸಂಗ್ರಹಿಸಲಾಗಿದೆ.

ಮೃತ ಪಿಎಸ್ಐ ಪರಶುರಾಮ ಪ್ರತಿಯೊಂದು ಕರೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಇದೀಗ ಅವರ ಎರಡು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದು, ಸಾಕ್ಷಿಗಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಈಗಾಗಲೆ ಶಾಸಕ ಚೆನ್ನಾರೆಡ್ಡಿ ವಿರುದ್ಧ ಜಾತಿ ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಪಿಎಸ್ಐ ಪರಶುರಾಮ ಸಾವು ರಾಜ್ಯ ಸರ್ಕಾರಕ್ಕೆ ತಲೆನೋವಾಗಿದೆ. ಮತ್ತು ಪಿಎಸ್ಐ ಪರಶುರಾಮ ಸಾವು ಬಳಿಕ ಶಾಸಕ ಚೆನ್ನಾರೆಡ್ಡಿ ನಾಪತ್ತೆಯಾಗಿದ್ದಾರೆ.